ಪೂರ್ವಭಾವಿ ಸಭೆ
ಫೆ.12ರಂದು ಕಂಪ್ಲಿ ಉತ್ಸವ ಅದ್ದೂರಿ ಆಚರಣೆ: ಶಾಸಕ ಜೆ.ಎನ್.ಗಣೇಶ್
ಬಳ್ಳಾರಿ,: ಪ್ರಥಮ ಬಾರಿಗೆ ಕಂಪ್ಲಿ ಭಾಗದ ಜನರ ಬಹುದಿನಗಳ ಬೇಡಿಕೆಯಾದ ಕಂಪ್ಲಿ ಉತ್ಸವವನ್ನು ಜಿಲ್ಲಾಡಳಿತ ವತಿಯಿಂದ ಫೆಬ್ರವರಿ 12 ರಂದು ಅದ್ದೂರಿಯಾಗಿ ನಡೆಸಲಾಗುವುದು ಎಂದು ಕಂಪ್ಲಿ ಶಾಸಕರಾದ ಜೆ.ಎನ್.ಗಣೇಶ್ ಅವರು ಹೇಳಿದರು.
ಮಂಗಳವಾರ ಕಂಪ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಉತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಜಯನಗರ ಸಾಮ್ರಾಜ್ಯ ಇತಿಹಾಸದ ಕುರುಹುಗಳುಳ್ಳ ಈ ಸ್ಥಳವು ಸೋಮನಾಥ ದೇವಾಲಯ, ಗಂಡುಗಲಿ ಕುಮಾರರಾಮ ಕೋಟೆ ಮುಖ್ಯವಾಗಿ ವಿಜಯನಗರ ಸಾಮ್ರಾಜ್ಯದ ಹೆಬ್ಬಾಗಿಲು ಎಂದೇ ಕರೆಯಲಾಗುತ್ತದೆ ಎಂದು ತಿಳಿಸಿದ ಅವರು, ಈ ಭಾಗದ ಜನರ ಬೇಡಿಕೆಯನ್ನು ಈಡೇರಿಸಲು ಮತ್ತು ಗ್ರಾಮೀಣ ಬದುಕಿನ ಚಿತ್ರಣವನ್ನು ಬಿಂಬಿಸುವ ಕೆಲಸ ಈ ಉತ್ಸವದ ಮೂಲಕ ಆಗಲಿದೆ. ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಮತ್ತು ಸಾರ್ವಜನಿಕರು ಭಾಗವಹಿಸಿ ಉತ್ಸವವನ್ನು ಯಶಸ್ವಿಯಾಗಲು ಕಾರಣೀಭೂತರಾಗಬೇಕು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಅವರು ಮಾತನಾಡಿ, ಜಿಲ್ಲಾಡಳಿತದಿಂದ ನಡೆಸಲಾಗುತ್ತಿರುವ ಈ ಉತ್ಸವಕ್ಕೆ ಬೇಕಾದ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.
ವೇದಿಕೆ ಕಾರ್ಯಕ್ರಮವನ್ನು ಕಲ್ಗುಡಿ ವಿಶ್ವನಾಥ ಲೇಔಟ್ ನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಕಂಪ್ಲಿ ಕೋಟೆ ಮಾದರಿಯ ವೇದಿಕೆ ನಿರ್ಮಾಣ ಮಾಡಲಾಗುವುದು ಎಂದರು.
ಉತ್ಸವದಲ್ಲಿ ತುಂಗಾರತಿ, ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ಹಾಗೂ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಕೃಷಿ ಪರಿಕರಗಳ ವಸ್ತು ಪ್ರದರ್ಶನ ಮಳಿಗೆಗಳು ಸೇರಿದಂತೆ 20 ರಿಂದ 30 ಮಳಿಗೆಗಳು ಆಯೋಜಿಸಲಾಗುವುದು. ಉತ್ಸವದಲ್ಲಿ ಗ್ರಾಮೀಣ ಕ್ರೀಡೆಗಳಾದ ಕಬ್ಬಡ್ಡಿ, ಕುಸ್ತಿ, ಮಲ್ಲಕಂಭ ಸ್ಪರ್ಧೆ ಮತ್ತು ಇತರೆ ಅಡುಗೆ ಸ್ಪರ್ಧೆ, ಮೆಹಂದಿ ಸ್ಪರ್ಧೆ, ರಂಗೋಲಿ ಸ್ಪರ್ಧೆ ಆಯೋಜಿಸಲಾಗುವುದು ಎಂದು ಹೇಳಿದರು.
ಜೆಸ್ಕಾಂ ವತಿಯಿಂದ ವಿದ್ಯುತ್ ವ್ಯವಸ್ಥೆಯಲ್ಲಿ ಅಡಚಣೆಯಾಗದಂತೆ ನೋಡಿಕೊಳ್ಳಬೇಕು. ಮುಖ್ಯ ವೃತ್ತ ಸೇರಿದಂತೆ ವೇದಿಕೆ ಕಾರ್ಯಕ್ರಮಕ್ಕೆ ತಲುಪುವ ಮುಖ್ಯ ರಸ್ತೆಗಳಲ್ಲಿ ದೀಪಾಲಂಕಾರ ವ್ಯವಸ್ಥೆ ಮಾಡಬೇಕು ಎಂದು ಪುರಸಭೆ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಊರಿನ ಮುಖಂಡರುಗಳ ಹಾಗೂ ಸಾರ್ವಜನಿಕರ ಅಭಿಪ್ರಾಯಗಳ ಮಾಹಿತಿ ಮತ್ತು ಸೂಕ್ತ ಸಲಹೆ ಸೂಚನೆಗಳನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ಕಂಪ್ಲಿ ಪುರಸಭೆ ಅಧ್ಯಕ್ಷೆ ಶಾಂತಲಾ ವಿದ್ಯಾಧರೆ, ತಹಶೀಲ್ದಾರ ಗೌಸಿಯಾ ಬೇಗಂ, ತಾಪಂ ಇಒ ಮಲ್ಲನಗೌಡ, ಪುರಸಭೆ ಮುಖ್ಯಾಧಿಕಾರಿ ಶಿವಲಿಂಗಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಹನುಮಂತಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮೊಹಮ್ಮದ್ ಖೈಜರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಂದಾನಪ್ಪ ವಡಗೇರಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುರೇಶ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಕನ್ನಡ ಪರ ಸಂಘಟನೆಗಳು, ಹಿರಿಯ ಮುಖಂಡರುಗಳು ಉಪಸ್ಥಿತರಿದ್ದರು…
ವರದಿ. ಉಮೇಶ್ ಬಳ್ಳಾರಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030