ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ : ಸಿಇಒ ರಾಹುಲ್ ರತ್ನಂ ಪಾಂಡೆಯ…!!!

Listen to this article

ಜನವಸತಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತು ಬರ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತಿ ಸಿಇಒ ಅವರಿಂದ ಸುದ್ದಿಗೋಷ್ಠಿ.
ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ : ಸಿಇಒ ರಾಹುಲ್ ರತ್ನಂ ಪಾಂಡೆಯ
ಕೊಪ್ಪಳ: ಜಿಲ್ಲೆಯ 7 ತಾಲ್ಲೂಕುಗಳು ಬರಪೀಡಿತ ತಾಲ್ಲೂಕುಗಳು ಎಂದು ಸರ್ಕಾರ ಘೋಷಿಸಿದ್ದು, ನಾಲ್ಕು ತಾಲ್ಲೂಕುಗಳ 17 ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, 33 ಸಮಸ್ಯಾತ್ಮಕ ಗ್ರಾಮಗಳಿಗೆ ಹಾಗೂ ಇತರೆ ಜನವಸತಿ ಪ್ರದೇಶಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ ಅವರು ತಿಳಿಸಿದರು.
ಮಂಗಳವಾರದಂದು ಜಿಲ್ಲಾ ಪಂಚಾಯತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಜನವಸತಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತು ಬರ ನಿರ್ವಹಣೆಗೆ ಸಂಬಂಧಿಸಿದಂತೆ ಕರೆಯಲಾಗಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.


ಜಿಲ್ಲೆಯ ಕೊಪ್ಪಳ, ಕುಷ್ಟಗಿ, ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕುಗಳ ಗ್ರಾಮ ಪಂಚಾಯತಿಗಳ ಪೈಕಿ 17 ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಬರುವ 8 ಗ್ರಾಮಗಳಲ್ಲಿ 10 ಟ್ಯಾಂಕರ್‌ಗಳ ಮೂಲಕ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಇತರೆ 25 ಗ್ರಾಮಗಳಿಗೆ 28 ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆದು ಕುಡಿಯುವ ನೀರು ಪೂರೈಸಲಾಗುತ್ತಿದೆ. ಗಂಗಾವತಿ ತಾಲ್ಲೂಕಿನ ಗ್ರಾಮಗಳಲ್ಲಿರುವ ಕೆರೆಗಳನ್ನು ತುಂಗಭದ್ರಾ ನದಿ ನೀರಿನ ಮೂಲಕ ತುಂಬಿಸಲಾಗಿದ್ದು, ಪ್ರಸ್ತುತ ಹಂತದಲ್ಲಿ ಕುಡಿಯುವ ನೀರಿನ ಯಾವುದೇ ಸಮಸ್ಯೆ ಇರುವುದಿಲ್ಲ. ಕನಕಗಿರಿ ಮತ್ತು ಕಾರಟಗಿ ತಾಲ್ಲೂಕುಗಳಲ್ಲಿ ಸಹ ಸದ್ಯ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿಲ್ಲ. ಕನಕಗಿರಿ ತಾಲ್ಲೂಕಿನ ಗ್ರಾಮಗಳಲ್ಲಿ 26 ಬೋರ್‌ವೆಲ್‌ಗಳನ್ನು ಫ್ಲಷಿಂಗ್ ಮಾಡಲು ಗುರುತಿಸಿದ್ದ, ಬೋರ‍್ವೆಲ್‌ಗಳನ್ನು ಫ್ಲಷಿಂಗ್ ಮಾಡುವುದರಿಂದ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವುದಿಲ್ಲ ಎಂದು ಸಿಇಒ ಅವರು ಮಾಹಿತಿ ನೀಡಿದರು.
ಬರಪೀಡಿತ ತಾಲೂಕುಗಳಲ್ಲಿ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರದಿಂದ ಪ್ರತಿ ತಾಲೂಕಿಗೆ ರೂ. 25 ಲಕ್ಷಗಳಂತೆ ಒಟ್ಟು 7 ತಾಲೂಕುಗಳಿಗೆ ರೂ. 175 ಲಕ್ಷಗಳು ಹಾಗೂ ತುರ್ತು ಕುಡಿಯುವ ನೀರಿನ ಕಾಮಗಾರಿಗಾಗಿ ಕೊಪ್ಪಳ ಜಿಲ್ಲೆಗೆ ರೂ. 140 ಲಕ್ಷಗಳನ್ನು ಬಿಡುಗಡೆ ಮಾಡಲಾಗಿದೆ. ಬರ ನಿರ್ವಹಣೆಗಾಗಿ ಡಿಸಿ ಪಿಡಿ ಖಾತೆಗೆ 16 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಅನುದಾನದಡಿ ನಿಯಮಾನುಸಾರ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಕ್ರಿಯಾ ಯೋಜನೆಯನ್ನು ರೂಪಿಸಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಂತೆ ಅನುಷ್ಠಾನಾಧಿಕಾರಿಗಳಿಗೆ ತಿಳಿಸಲಾಗಿದೆ. ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಪೂರೈಸಲಾಗುತ್ತಿರುವ ಕುಡಿಯುವ ನೀರಿನ ಪರೀಕ್ಷೆಯನ್ನು ನಿಯಮಿತವಾಗಿ ಕೈಗೊಳ್ಳಲು ಸಂಬಂಧಿಸಿದ ಸಿಬ್ಬಂದಿಗಳಿಗೆ ತಿಳಿಸಿ, ಪರೀಕ್ಷೆಗಳ ವರದಿಯನ್ನು ಪ್ರತಿ ದಿನ ಸಿದ್ಧಪಡಿಸಿ ಸಂಬಂಧಿಸಿದ ಗ್ರಾಮ ಪಂಚಾಯತಿಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಅಗತ್ಯ ಕ್ರಮಕ್ಕಾಗಿ ರವಾನಿಸಲಾಗುತ್ತಿದೆ. ನೀರಿನ ಪರೀಕ್ಷೆಗಾಗಿ ಕೊಪ್ಪಳ ಹಾಗೂ ಕುಷ್ಟಗಿಯಲ್ಲಿ 2 ಪ್ರಯೋಗಾಲಯಗಳಿದ್ದು, ನೀರು ಬಳಕೆಗೆ ಯೋಗ್ಯವಿದ್ದರೆ ಮಾತ್ರ ನೀರು ಪೂರೈಸಲಾಗುತ್ತದೆ ಎಂದು ಅವರು ತಿಳಿಸಿದರು.
ಗ್ರಾಮ ಹಾಗೂ ತಾಲೂಕಾ ಮಟ್ಟದಲ್ಲಿ ನಿಯಮಿತವಾಗಿ ಟಾಸ್ಕ್ ಫೋರ್ಸ್ ಸಮಿತಿಯ ಸಭೆಗಳನ್ನು ಆಯೋಜಿಸಿ ಜನವಸತಿ ಪ್ರದೇಶಗಳಲ್ಲಿಯ ಕುಡಿಯುವ ನೀರಿನ ಸಮಸ್ಯೆಗಳನ್ನು ಗುರುತಿಸಿ ಪರಿಹರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಈಗಾಗಲೇ ಸೂಕ್ತ ನಿರ್ದೇಶನ ನೀಡಲಾಗಿದೆ. ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ, ಗ್ರಾಮ ಪಂಚಾಯತಿ, ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಕುಡಿಯುವ ನೀರಿನ ಸಹಾಯವಾಣಿಗಳನ್ನು ತೆರೆಯಲಾಗಿದ್ದು, ಸಹಾಯವಾಣಿಗಳ ಸಂಖ್ಯೆಗಳನ್ನು ಜಿಲ್ಲೆಯಲ್ಲಿ ಪ್ರಚೂರ ಪಡಿಸಲಾಗಿದೆ. ಸಹಾಯವಾಣಿಗಳ ಮೂಲಕ ದಾಖಲಾದ ದೂರುಗಳನ್ನು 24 ಗಂಟೆಯೊಳಗಾಗಿ ಪರಿಹರಿಸಲು ಅಗತ್ಯ ಕ್ರಮ ವಹಿಸಲಾಗಿದೆ. ಜಿಲ್ಲೆಯಲ್ಲಿ 6366 ಖಾಸಗಿ ಬೋರ್‌ವೆಲ್‌ಗಳಿದ್ದು, ಇದರಲ್ಲಿ 898 ಬೋರ್‌ವೆಲ್‌ಗಳನ್ನು ಗುರುತಿಸಿ, ಬಾಡಿಗೆ ಪಡೆಯಲು ಕ್ರಮ ವಹಿಸಲಾಗುತ್ತಿದೆ. 150 ಬೋರ್‌ವೆಲ್‌ಗಳಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಖಾಸಗಿ ಬೋರ್‌ವೆಲ್‌ಗಳ ಬಗ್ಗೆ ಮಾಹಿತಿ ನೀಡಿದರು.
34 ವಾರಗಳವರೆಗೆ ಮೇವು ಲಭ್ಯ: ಕೊಪ್ಪಳ ಜಿಲ್ಲೆಯಲ್ಲಿ 2,94,880 ದನ ಮತ್ತು ಎಮ್ಮೆಗಳು, 7,97,945 ಕುರಿ-ಮೇಕೆಗಳಿವೆ. ಈ ಎಲ್ಲಾ ಜಾನುವಾರುಗಳಿಗೆ ಅವಶ್ಯವಿರುವ 5,10,954.04 ಟನ್ ಮೇವು ಲಭ್ಯವಿದ್ದು, ಈ ಮೇವು 34 ವಾರಗಳ ವರೆಗೆ ಬಳಕೆಯಾಗಲಿದೆ ಎಂದು ಸಿಇಒ ಅವರು ತಿಳಿಸಿದರು.
ಈ ಸಂದರ್ಭ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ಡಿ.ಮಂಜುನಾಥ ಸೇರಿದಂತೆ ಇತರರು ಉಪಸ್ಥಿತರಿದ್ದರು….

ವರದಿ. ಮಂಜುನಾಥ್ ಉಪ್ಪಾರ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend