ಮತದಾನ ಜಾಗೃತಿಗಾಗಿ ಬೈಕ್ ರ್ಯಾಲಿ
ಚಿತ್ರದುರ್ಗ:ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಬುಧವಾರ ಮತದಾನದ ಮಹತ್ವದ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಚಿತ್ರದುರ್ಗ ನಗರದಲ್ಲಿ ಬೈಕ್ ರ್ಯಾಲಿ ನಡೆಯಿತು.
ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಎಸ್.ಜೆ.ಸೋಮಶೇಖರ್ ಅವರು ಮತದಾನ ಜಾಗೃತಿಗಾಗಿ ಬೈಕ್ ರ್ಯಾಲಿ ಜಾಥಾಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಎಸ್.ಜೆ.ಸೋಮಶೇಖರ್, ಇದೇ ಏಪ್ರಿಲ್ 26ರಂದು ಪ್ರಜಾಪ್ರಭುತ್ವ ಹಬ್ಬದಲ್ಲಿ ಎಲ್ಲರೂ ಪಾಲ್ಗೊಂಡು, ತಮ್ಮ ಮತದಾನ ಹಕ್ಕು ಚಲಾಯಿಸಲು ಸುವರ್ಣ ಅವಕಾಶ. ಪ್ರತಿ ಐದು ವರ್ಷಕೊಮ್ಮೆ ಬರುವ ಈ ಹಬ್ಬದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿರುವ ಎಲ್ಲ ಅರ್ಹ ಮತದಾರರು ಮತಗಟ್ಟೆಗೆ ಬಂದು ಕಡ್ಡಾಯವಾಗಿ ಮತದಾನ ಮಾಡಬೇಕು. ತಾವುಗಳು ಮತ್ತು ನಿಮ್ಮ ಸ್ನೇಹಿತರು, ಬಂಧುಗಳಿಗೆ ಮತ್ತು ಕುಟುಂಬದವರಿಗೆ ಮತದಾನ ಮಾಡುವಂತೆ ತಿಳಿಸಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಶೇ.70ರಷ್ಟು ಮತದಾನವಾಗಿದ್ದು, ಈ ಬಾರಿ ಶೇ.5ರಷ್ಟು ಮತದಾನದ ಪ್ರಮಾಣ ಹೆಚ್ಚಾಗಲು ಪ್ರತಿಯೊಬ್ಬರು ಮತದಾನ ಮಾಡಬೇಕು ಎನ್ನುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಯಾವುದೇ ಭಯ ಪಡದೇ ನಿರ್ಭಿತಿಯಿಂದ ಮತಗಟ್ಟೆಗೆ ಬಂದು ಕಡ್ಡಾಯವಾಗಿ ಮತದಾನ ಮಾಡಬೇಕು. ಯಾರು ಕೂಡ ಮತದಾನದಿಂದ ವಂಚಿತರಾಗಬಾರದು ಎಂದು ಹೇಳಿದರು.
ಮತದಾನ ಜಾಗೃತಿ ಬೈಕ್ ರ್ಯಾಲಿಯು ಜಿಲ್ಲಾ ಪಂಚಾಯತ್ನಿಂದ ಪ್ರಾರಂಭವಾಗಿ ಮದಕರಿ ವೃತ್ತ, ಪ್ರವಾಸಿ ಮಂದಿರ ಮಾರ್ಗವಾಗಿ ಗಾಂಧಿ ವೃತ್ತ, ಸಂಗೊಳ್ಳಿರಾಯಣ್ಣ ವೃತ್ತ ಮಾರ್ಗವಾಗಿ ಕನಕ ವೃತ್ತದಿಂದ ನೇರವಾಗಿ ಓನಕೆ ಓಬವ್ವ ವೃತ್ತದ ಮೂಲಕ ಜಿಲ್ಲಾ ಪಂಚಾಯತ್ನಲ್ಲಿ ಕೊನೆಗೊಂಡಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪಿ.ಎಸ್.ಅಂತರಾಜು, ಜಿಲ್ಲಾ ಸ್ವೀಪ್ ಸಮಿತಿಯ ಸಂಯೋಜಕಿ ಸುಷ್ಮಾರಾಣಿ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರಾದ ಹೆಚ್.ಯರ್ರಿಸ್ವಾಮಿ, ರೂಪ ಕುಮಾರಿ, ಜಿಲ್ಲಾ ಪಂಚಾಯತ್ ಎಲ್ಲಾ ಶಾಖೆಗಳ ಮುಖಸ್ಥರು, ಸಿಬ್ಬಂದಿಗಳು ಮತ್ತು ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇದ್ದರು…
ವರದಿ. ಪ್ರದೀಪ್, ಚಿತ್ರದುರ್ಗ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030