ಜುಲೈ 19 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ; ಕೋವಿಡ್ ನಿಯಾವಳಿಗಳನ್ನು ಕಡ್ಡಾಯವಾಗಿ ಪಾಲಿಸಲು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸಲಹೆ
ಚಿತ್ರದುರ್ಗ,ಜುಲೈ3
ಎಸ್.ಎಸ್.ಎಲ್.ಸಿ ಪರೀಕ್ಷೆಯು ಜುಲೈ 19, 22 ಹಾಗೂ 23 ರಂದು ನಡೆಯಲಿದ್ದು ಈ ಅವಧಿಯಲ್ಲಿ ಎಲ್ಲಾ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಕೋವಿಡ್ ನಿಯಮಗಳನ್ನು ಪಾಲನೆ ಮಾಡಲು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು.
ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪರೀಕ್ಷಾ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 22186 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು ಒಟ್ಟು 133 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಕೋರ್ ಸಬ್ಜಕ್ಟ್ ಹಾಗೂ ಭಾಷಾ ವಿಷಯಗಳಿಗೆ ಪ್ರತಿ ವಿಷಯಕ್ಕೆ 40 ಅಂಕಗಳಿಗೆ ಪರೀಕ್ಷೆ ನಡೆಯಲಿದ್ದು ಬಹು ಆಯ್ಕೆ ಪ್ರಶ್ನೆಗಳಿರುತ್ತವೆ. ಇದಲ್ಲದೆ ಕಿರಿಯ ತಾಂತ್ರಿಕ ವಿಷಯಗಳು ಹಾಗೂ ಜೆ.ಟಿ.ಎಸ್. ಅಭ್ಯರ್ಥಿಗಳಿಗೆ ಪ್ರಾಯೋಗಿಕ ಹಾಗೂ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಡೆಸಲಾಗುತ್ತದೆ. ಇದಲ್ಲದೆ ಅಂಧ,ಕಿವುಡ, ಮೂಗ ಹಾಗೂ ಕಲಿಕಾ ನ್ಯುನ್ಯತೆ ಇರುವ ಮಕ್ಕಳಿಗೆ ಪರೀಕ್ಷೆ ಬರೆಯಲು ನಿಗದಿಪಡಿಸಿರುವ ಸಮಯದ ಜೊತೆಗೆ 15 ನಿಮಿಷಗಳ ಹೆಚ್ಚುವರಿ ಸಮಯ ನೀಡಲಾಗುತ್ತದೆ ಎಂದರು.
ಓಎಂಆರ್ ಮಾದರಿಯ ಪ್ರಶ್ನೆ ಪತ್ರಿಕೆಗಳಿದ್ದು ಸ್ಕ್ಯಾನ್ ಮಾರ್ಕ್ ಮೂಲಕ ಮೌಲ್ಯಮಾಪನ ಮಾಡಲಾಗುತ್ತದೆ. ಜುಲೈ 19 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ಸಮಾಜಶಾಸ್ತ್ರ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ ಪರೀಕ್ಷೆ ನಡೆಯಲಿದೆ. ಜು.19 ರಂದು ಮಧ್ಯಾಹ್ನ 2.30 ರಿಂದ 5 ಗಂಟೆಯವರೆಗೆ ಪೇಪರ್-3 ವಿಷಯಗಳಾದ ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಅಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್ ಪರೀಕ್ಷೆ ನಡೆಯಲಿದೆ. ಜು.20, 21 ರಜಾ ದಿನಗಳಾಗಿವೆ. ಜು.22 ರಂದು ಬೆಳಗ್ಗೆ 10.30 ರಿಂದ 3 ಗಂಟೆಯವರೆಗೆ ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮುಳು, ಉರ್ದು, ಇಂಗ್ಲೀಷ್, ಸಂಸ್ಕøತ, ದ್ವಿತೀಯ ಭಾಷೆ ಇಂಗ್ಲೀಷ್, ಕನ್ನಡ, ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕøತ, ಕೊಂಕಣಿ, ತುಳು, ಎನ್.ಎಸ್.ಕ್ಯೂ.ಎಪ್ ಪರೀಕ್ಷಾ ವಿಷಯಗಳಾದ ಮಾಹಿತಿ ತಂತ್ರಜ್ಞಾನ, ರೀಟೇಲ್, ಅಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲೆ ನೆಸ್ ಪರೀಕ್ಷೆ ನಡೆಯಲಿದೆ. ಜು.23 ರಂದು ಜೆ.ಟಿ.ಎಸ್ ಅಭ್ಯರ್ಥಿಗಳಿಗೆ ಮಾತ್ರ ಪ್ರಾಯೋಗಿಕ ಹಾಗೂ ಮೌಖಿಕ ಪರೀಕ್ಷೆ ನಡೆಯಲಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಆಸನದ ವ್ಯವಸ್ಥೆ, ನೀರು, ವಿದ್ಯುತ್ ವ್ಯವಸ್ಥೆಯನ್ನು ಕಲ್ಪಿಸಬೇಕು, ಇದಕ್ಕಾಗಿ ಮೊದಲೆ ಕೇಂದ್ರಗಳನ್ನು ಪರಿಶೀಲನೆ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ತಿಳಿಸಿದರು. ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಬಂದು ಹೋಗಲು ಕೆ.ಎಸ್.ಆರ್.ಟಿ.ಸಿ ಹಾಗೂ ಖಾಸಗಿ ಬಸ್ಗಳು ನಿಗದಿತ ಸಮಯದಲ್ಲಿ ಸಂಚರಿಸಬೇಕು. ಮತ್ತು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಥರ್ಮಲ್ ಸ್ಕ್ಯಾನರ್ ಹಾಗೂ ಪಲ್ಸ್ ಆಕ್ಸಿ ಮೀಟರ್ ಮೂಲಕ ತಪಾಸಣೆ ಮಾಡಲು ತಿಳಿಸಿದರು.
ಪರೀಕ್ಷಾ ಕೇಂದ್ರ ಸುತ್ತಮುತ್ತ ಸೂಕ್ತ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಬೇಕು. ಇದಕ್ಕಾಗಿ 144 ಸೆಕ್ಷನ್ ಜಾರಿಗೊಳಿಸಲಾಗುತ್ತದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ ಯಾವುದೇ ಜೆರಾಕ್ಸ್ ಅಂಗಡಿಗಳು ಹಾಗೂ ಇಂಟರ್ನೆಟ್ ಸೆಂಟರ್ಗಳನ್ನು ತೆರೆಯುವಂತಿಲ್ಲ. ಪರೀಕ್ಷಾ ಎಲ್ಲಾ ಮೇಲ್ವಿಚಾರಕರು ಹಾಗೂ ಅಧೀಕ್ಷಕರು ಪರೀಕ್ಷೆಯನ್ನು ವ್ಯವಸ್ಥಿತವಾಗಿ ಪರೀಕ್ಷೆ ನಡೆಸಬೇಕು ಹಾಗೂ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಕೊಡಬಾರದು ಎಂದರು.
ಚಳ್ಳಕೆರೆ 30, ಚಿತ್ರದುರ್ಗ 35, ಹಿರಿಯೂರು 17, ಹೊಳಲ್ಕೆರೆ 18, ಹೊಸದುರ್ಗ 17, ಮೊಳಕಾಲ್ಮೂರು 13 ಸೇರಿ ಖಾಸಗಿ ಅಭ್ಯಾರ್ಥಿಗಳ ಪರೀಕ್ಷಾ ಕೇಂದ್ರ 3 ಸೇರಿ ಒಟ್ಟು 133 ಪರೀಕ್ಷಾ ಕೇಂದ್ರಗಳಲ್ಲಿ 22186 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಹೆಚ್ಚುವರಿ ರಕ್ಷಣಾಧಿಕಾರಿ ನಂದಗಾವಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರವಿಶಂಕರ್ರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ; ರಂಗನಾಥ್ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ. ಶಶಿಕುಮಾರ್ ಚಳ್ಳಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030