ಕೃಷಿ ಜಾಗೃತಿ ಅಭಿಯಾನಕ್ಕೆ ಸಚಿವ ಬಿ.ಸಿ. ಪಾಟೀಲ್ ಚಾಲನೆ
ದಾವಣಗೆರೆ ಜೂ. 08 :
ಕೃಷಿ ಇಲಾಖೆಯು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿನ ರೈತರನ್ನು ಜಾಗೃತಗೊಳಿಸಲು ಆರಂಭಿಸಿರುವ ‘ಕೃಷಿ ಜಾಗೃತಿ ಅಭಿಯಾನ’ ವಿಶೇಷ ಪ್ರಚಾರ ವಾಹನಗಳಿಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಜಿಲ್ಲಾಡಳಿತ ಭವನದ ಆವರಣದಲ್ಲಿ ಕೃಷಿ ಜಾಗೃತಿ ಅಭಿಯಾನಕ್ಕೆ ಹಸಿರು ನಿಶಾನೆ ತೋರುವ ಮೂಲಕ ಮಂಗಳವಾರದಂದು ಚಾಲನೆ ನೀಡಲಾಯಿತು. ಜಾಗೃತಿ ಅಭಿಯಾನದಲ್ಲಿ ಕೃಷಿ ಇಲಾಖೆಯ ಜೊತೆ ಜೊತೆಗೆ ಪಶುಸಂಗೋಪನೆ, ಮೀನುಗಾರಿಕೆ, ತೋಟಗಾರಿಕೆ ಇಲಾಖೆಗಳಡಿ ರೈತರಿಗೆ ನೆರವಾಗುವ ಇಲಾಖೆಗಳಲ್ಲಿ ರೈತರಿಗಾಗಿ ಲಭ್ಯವಿರುವ ಯೋಜನೆಗಳ ಮಾಹಿತಿಯನ್ನು ಪ್ರಚಾರ ವಾಹನದ ಫಲಕದಲ್ಲಿ ಅಳವಡಿಸಲಾಗಿದೆ. ಅಲ್ಲದೆ ಹಸಿರೆಲೆ ಗೊಬ್ಬರದ ಪ್ರಯೋಜನ, ಕೃಷಿ ಇಲಾಖೆಯ ಪ್ರಮುಖ ಯೋಜನೆಗಳು, ಪಶುಸಂಗೋಪನೆ ಇಲಾಖೆಯ ವಿವಿಧ ಯೋಜನೆಗಳು, ಮೀನುಗಾರಿಕೆ ಇಲಾಖೆಯಿಂದ ಮೀನುಮರಿ ಸಾಕಾಣಿಕೆ ಮುಂತಾದ ಯೋಜನೆಗಳ ಮಾಹಿತಿ ಪ್ರದರ್ಶಿಸಲಾಗಿದೆ. ಇದರ ಜೊತೆಗೆ ಅಂತರ ಬೆಳೆ ಕುರಿತು ರೈತರಲ್ಲಿ ಜಾಗೃತಿ ಮೂಡಿಸಲು ಉದ್ದೇಶಿಸಲಾಗಿದೆ. ಕೃಷಿ ಜಾಗೃತಿ ಅಭಿಯಾನ ವಾಹನಗಳ ಜಿಲ್ಲೆಯ ವಿವಿಧ ತಾಲ್ಲೂಕುಗಳ ಗ್ರಾಮೀಣ ಪ್ರದೇಶಗಳಲ್ಲಿ ಸಂಚರಿಸಿ ರೈತರಲ್ಲಿ ಜಾಗೃತಿ ಮೂಡಿಸುವ ಉದ್ದೇಶವನ್ನು ಇಲಾಖೆ ಹೊಂದಿದೆ.
ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ್, ಸಂಸದ ಜಿ.ಎಂ. ಸಿದ್ದೇಶ್ವರ್, ಚನ್ನಗಿರಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ, ಜಗಳೂರು ಶಾಸಕ ಎಸ್.ವಿ. ರಾಮಚಂದ್ರ, ದಾವಣಗೆರೆ ಉತ್ತರ ಕ್ಷೇತ್ರ ಶಾಸಕ ಎಸ್.ಎ. ರವೀಂದ್ರನಾಥ್, ಮಾಯಕೊಂಡ ಶಾಸಕ ಪ್ರೊ. ಲಿಂಗಣ್ಣ, ಮಹಾನಗರಪಾಲಿಕೆ ಮಹಾಪೌರ ಎಸ್.ಟಿ. ವೀರೇಶ್, ಕೃಷಿ ಇಲಾಖೆ ಅಪರ ಆಯುಕ್ತ ವೆಂಕಟರಾವ್ ಪಾಟೀಲ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿ.ಪಂ. ಸಿಇಒ ಡಾ. ವಿಜಯ ಮಹಾಂತೇಶ್, ಎಸ್ಪಿ ಹನುಮಂತರಾಯ, ಜಂಟಿಕೃಷಿ ನಿರ್ದೇಶಕ ಶ್ರೀನಿವಾಸ ಚಿಂತಾಲ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದು, ಜಾಗೃತಿ ವಾಹನಗಳಿಗೆ ಹಸಿರು ನಿಶಾನೆ ತೋರುವ ಮೂಲಕ ಅಭಿಯಾನಕ್ಕೆ ಯಶಸ್ಸು ಕೋರಿದರು.
ವರದಿ. ರೇಖಾ, ಆರ್, ಲಿಂಗಾಪುರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030