ಕೋವಿಡ್ ನಿಯಂತ್ರಣ ನಿರ್ಬಂಧಗಳನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ಅಗತ್ಯ ವಸ್ತುಗಳ ಖರೀದಿಗೆ ಮೇ 31 ಮತ್ತು ಜೂ.3 ರಂದು ಅವಕಾಶ…!!!

Listen to this article

ಕೋವಿಡ್ ನಿಯಂತ್ರಣ ನಿರ್ಬಂಧಗಳನ್ನು ಉಲ್ಲಂಘಿಸಿದರೆ ಕಠಿಣ ಕ್ರಮ
ಅಗತ್ಯ ವಸ್ತುಗಳ ಖರೀದಿಗೆ ಮೇ 31 ಮತ್ತು ಜೂ.3 ರಂದು ಅವಕಾಶ : ಡಿಸಿ
ದಾವಣಗೆರೆ,ಮೇ.29 :
ಜಿಲ್ಲೆಯಾದ್ಯಂತ ಜೂನ್ 7 ರವರೆಗೆ ಕೋವಿಡ್ ನಿಯಂತ್ರಣ ಕ್ರಮಗಳು ಜಾರಿಯಲ್ಲಿದ್ದು, ಸಾರ್ವಜನಿಕರಿಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡುವ ಹಿನ್ನೆಲೆಯಲ್ಲಿ ಮೇ 31 ಮತ್ತು ಜೂನ್ 03 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಮಾತ್ರ ಕಿರಾಣಿ ಅಂಗಡಿಗಳು, ದಿನಸಿ, ಹಣ್ಣು ತರಕಾರಿ, ಮಾಂಸ ಮತ್ತು ಮೀನು ಹಾಗೂ ಮದ್ಯದ ಅಂಗಡಿಗಳಿಗೆ ಅನುಮತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಹಿನ್ನೆಲೆ ಹೊರಡಿಸಲಾಗಿರುವ ನಿರ್ಬಂಧ/ಮಾರ್ಗಸೂಚಿಗಳ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನದಂತೆ ಈಗಾಗಲೇ ಹಲವಾರು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೂ ಜಿಲ್ಲೆಯಲ್ಲಿ ಸತತವಾಗಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಪ್ರಮಾಣ ತಗ್ಗಿಸುವ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿದಾಗ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿರುವ ಹಿನ್ನೆಲೆಯಲ್ಲಿ ಕೆಲವೊಂದು ನಿರ್ಬಂಧ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಹೊಸ ನಿರ್ಬಂಧಗಳನ್ವಯ ಮೇ.31 ಮತ್ತು ಜೂ.3 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಕಿರಾಣಿ ಅಂಗಡಿಗಳು, ದಿನಸಿ, ಹಣ್ಣು ತರಕಾರಿಗಳು, ಮಾಂಸ ಮತ್ತು ಮೀನು, ಮದ್ಯದ ಅಂಗಡಿಗಳಿಗೆ ಮಾತ್ರ ಅವಕಾಶ ಇದ್ದು ಉಳಿದ ದಿನಗಳು ಹಾಲು ಮತ್ತು ಔಷಧಿಗಳನ್ನು ಹೊರತುಪಡಿಸಿ ಸಂಪೂರ್ಣವಾಗಿ ಬಂದ್ ಇರುತ್ತದೆ.
ಹಾಗೂ ಜೂ.4 ರವರೆಗೆ ಮಾತ್ರ ನಿಗಧಿತ ಮದುವೆ ಕಾರ್ಯಕ್ರಮಗಳನ್ನು ನಡೆಸಲು ಸಂಬಂಧಿಸಿದ ಪ್ರಾಧಿಕಾರದಿಂದ ಅನುಮತಿ ಪಡೆದು ಗರಿಷ್ಠ 10 ಜನರು ಮಾತ್ರ ಭಾಗವಹಿಸಿ ಮದುವೆ ಕಾರ್ಯಕ್ರಮ ನಡೆಸಲು ಅವಕಾಶ ನೀಡಲಾಗಿದೆ. ಈ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಲ್ಲಿ ವಿಪತ್ತು ನಿರ್ವಹಣೆ ಕಾಯ್ದೆಯನ್ವಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.
• ಎಲ್ಲಾ ಅಂಗಡಿ ಮುಂಗಟ್ಟುಗಳು/ವಾಣಿಜ್ಯ/ಕೈಗಾರಿಕಾ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ.
• ಸಾರ್ವಜನಿಕರು ಅಗತ್ಯ ಚಟುವಟಿಕೆಗಳಿಗೆ ವಾಹನಗಳಲ್ಲಿ ಸಂಚರಿಸುವುದನ್ನು ನಿರ್ಬಂಧಿಸಿ, ನಡೆದುಕೊಂಡು ಹೊಗಲು ಮಾತ್ರ ಅವಕಾಶ ನೀಡಲಾಗಿದೆ.
• ಕೃಷಿ ಅವಲಂಬಿತ ಕೈಗಾರಿಕೆಗಳು ಕಾರ್ಯನಿರ್ವಹಿಸಲು ಅನುಮತಿಸಿದೆ ಹಾಗೂ ಕೃಷಿ ಉಪಕರಣ ಬಾಡಿಗೆ ಕೇಂದ್ರಗಳಿಗೆ, ಯಂತ್ರೋಪಕರಣಗಳಿಗೆ ಸಂಬಂಧಿಸಿದ ಅಂಗಡಿಗಳು ಮತ್ತು ಗೋದಾಮುಗಳು ಸೇರಿದಂತೆ ಎಲ್ಲಾ ಕೃಷಿ ಮತ್ತು ತಕ್ಷಂಬಂಧಿತ ಅಂಗಡಿಗಳು ಮತ್ತು ಗೋದಾಮುಗಳು ಸೇರಿದಂತೆ ಎಲ್ಲಾ ಕೃಷಿ ಮತ್ತು ತತ್ಸಂಬಂಧಿತ ಕಾರ್ಯಚಟುವಟಿಕೆಗಳಿಗೆ ಹಾಗೂ ಸಿಬ್ಬಂದಿಗಳು ಕೃಷಿ ಕೈಗಾರಿಕಾ ಸಂಸ್ಥೆಗಳು ನೀಡಿದ ಅರ್ಹ ಗುರುತಿನ ಚೀಟಿ/ಅಧಿಕೃತ ಪತ್ರವನ್ನು ತೋರಿಸುವ ಮೂಲಕ ಓಡಾಡುವುದಕ್ಕೆ ಅನುಮತಿಸಿದೆ.
• ಕೃಷಿ ಚಟುವಟಿಕೆಗಳಿಗೆ ಅನುವಾಗುವಂತೆ ಅಗತ್ಯ ವಸ್ತುಗಳಾದ ಬೀಜ, ಗೊಬ್ಬರ, ಕೀಟ ನಾಶಕಗಳು, ಕೃಷಿ ಕೋಯ್ಲು ಯಂತ್ರೋಪಕರಣಗಳ ಸಾಗಣೆ ಮತ್ತು ಸಂಬಂಧಿಸಿದ ಅಂಗಡಿ ಮತ್ತು ಗೋದಾಮುಗಳಲ್ಲಿ ಇಳಿಸಲು ಮತ್ತು ಪ್ರತಿ ದಿನ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಟೆಯವರೆಗೆ ವ್ಯಾಪಾರ ವಹಿವಾಟು ನಡೆಸಲು ಅನುಮತಿಸಿದೆ.
• ಜೂ.4 ರವರೆಗೆ ಮಾತ್ರ ನಿಗಧಿತ ಮದುವೆ ಕಾರ್ಯಕ್ರಮಗಳನ್ನು ನಡೆಸಲು ಸಂಬಂಧಿಸಿದ ಪ್ರಾಧಿಕಾರದಿಂದ ಅನುಮತಿ ಪಡೆದು ಗರಿಸಷ್ಠ 10 ಜನರು ಮಾತ್ರ ಭಾಗವಹಿಸಿ ಮದುವೆ ಕಾರ್ಯಕ್ರಮ ನಡೆಸಲು ಅವಕಾಶ ನೀಡಲಾಗಿದೆ. ಮದುವೆಗಳಲ್ಲಿ ಸಾರ್ವಜನಿಕರಿಗೆ ಊಟದ ವ್ಯವಸ್ಥೆಯನ್ನು ನಿರ್ಬಂಧಿಸಲಾಗಿದೆ.
• ಉಳಿದ ಎಲ್ಲಾ ಸಾಮಾಜಿಕ, ಧಾರ್ಮಿಕ ಸಭೆ ಸಮಾರಂಭಗಳನ್ನು ನಿರ್ಬಂಧಿಸಲಾಗಿದೆ. ಅಂತ್ಯಸಂಸ್ಕಾರ/ಶವ ಸಂಸ್ಕಾರಗಳಲ್ಲಿ ಗರಿಷ್ಟ 5 ಜನರಿಗೆ ಮಾತ್ರ ಭಾಗವಹಿಸಲು ಅನುಮತಿಸಿದೆ. ದಾವಣಗೆರೆ ಜಿಲ್ಲೆಗೆ ಆಗಮಿಸುವವರನ್ನು ಪ್ರತೀ ಚೆಕ್ ಪೋಸ್ಟ್‍ಗಳಲ್ಲಿ ವಿಚಾರಣೆ ನಡೆಸಿ, ದಾವಣಗೆರೆ ಜಿಲ್ಲೆಯಲ್ಲಿ ವಾಸ್ತವ್ಯ ಹೂಡುವುದಾದಲ್ಲಿ ಎಲ್ಲಿ ತಂಗುತ್ತಾರೆ ಎಂಬ ಬಗ್ಗೆ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆಯನ್ನು ಪಡೆದುಕೊಳ್ಳಲಾಗುವುದು ಹಾಗೂ ಹೊರ ಜಿಲ್ಲೆಯಿಂದ ಆಗಮಿಸುವವರು ಕಡ್ಡಾಯವಾಗಿ 14 ದಿನಗಳ ಕಾಲ ಹೋಂ ಕ್ವಾರಂಟೈನ್‍ನಲ್ಲಿ ಇರಬೇಕು.
• ವಾಹನ ಬಳಕೆಯನ್ನು ತುರ್ತು ವೈದ್ಯಕೀಯ ಸೇವೆಗಳಿಗೆ ಮಾತ್ರ ಬಳಸಬಹುದು, ವೈದ್ಯಕೀಯ ದಾಖಲೆಗಳನ್ನು ಚೆಕ್ ಪೋಸ್ಟ್‍ಗಳಲ್ಲಿ ತೋರಿಸಬೇಕು. ಇತರೆ ಎಲ್ಲಾ ಖಾಸಗಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ವೈದ್ಯಕೀಯ ಹಾಗೂ ತುರ್ತು ಸೇವೆಗಳ ಎಲ್ಲಾ ಅಧಿಕಾರಿಗಳು/ಸಿಬ್ಬಂದಿಗಳ ಕರ್ತವ್ಯ ನಿಮಿತ್ತ ಓಡಾಟಕ್ಕೆ ಯಾವುದೆ ನಿರ್ಬಂಧವಿರುವುದಿಲ್ಲ. ಆದರೆ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ತಪಾಸಣಾ ಸಿಬ್ಬಂದಿಗಳಿಗೆ ತೋರಿಸಬೇಕು. ಖಾಸಗಿ ಭದ್ರತಾ ಸೇವೆಗಳಿಗೆ ಅನುಮತಿಸಲಾಗಿದೆ.
• ಕ್ಲಿನಿಕ್, ಆಸ್ಪತ್ರೆ, ಲಸಿಕೆ ಹಾಗೂ ಪರೀಕ್ಷೆ ಉದ್ದೇಶಗಳಿಗೆ ಕನಿಷ್ಟ ವೈದ್ಯಕೀಯ ದಾಖಲೆಗಳು, ವೈದ್ಯ ಸಲಹಾ ಚೀಟಿ, ಆಸ್ಪತ್ರೆಯಲ್ಲಿ ದಾಖಲಾದ ವಿವರಗಳ ರುಜುವಾತಿನೊಂದಿಗೆ ಸಂಚರಿಸಲು ಅನುಮತಿಸಲಾಗಿದೆ.
• ಹೋಟೆಲ್, ರೆಸ್ಟೋರೆಂಟ್‍ಗಳು, ಉಪಾಹಾರ ಗೃಹಗಳು ಪಾರ್ಸಲ್ ಸೇವೆಗಳನ್ನು ಗ್ರಾಹಕರ ಮನೆ ಬಾಗಿಲಿಗೆ ವಿತರಿಸಲು ಮಾತ್ರ ಅನುಮತಿ ಇದೆ. ಯಾವುದೇ ರೀತಿಯ ಪಾರ್ಸ್‍ಲ್‍ಗಳನ್ನು ಗ್ರಾಹಕರು ನೇರವಾಗಿ ಖರೀದಿಸಲು ಅವಕಾಶವಿರುವುದಿಲ್ಲ.
• ಕೋವಿಡ್-19ಕ್ಕೆ ಸಂಬಂಧಿಸಿದ ಕಾರ್ಯಕ್ಕೆ ನಿಯೋಜಿಸಿದ ಎಲ್ಲಾ ಕಛೇರಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸರ್ಕಾರದ ಆದೇಶ ಸಂಖ್ಯೆ ಆರ್‍ಡಿ/158/ಟಿಎನ್‍ಆರ್/2020 ದಿ.07.05.2021ರಂತೆ ಕಾರ್ಯನಿರ್ವಹಿಸಬೇಕು. ಆದರೆ, ಈ ಕಛೇರಿಗಳಿಗೆ ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿಸಲಾಗಿದೆ.
• ಜಿಲ್ಲೆಯಲ್ಲಿ ಕಛೇರಿ ವೇಳೆಯನ್ನು ಮೀರಿ ತಮ್ಮ ಕರ್ತವ್ಯಗಳಿಗೆ ಹಾಜರಾಗುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಜಿಲ್ಲೆಯ ನ್ಯಾಯಾಂಗದ ಅಧಿಕಾರಿ/ಸಿಬ್ಬಂದಿಗಳು ತಮ್ಮ ಅಧಿಕೃತ ಗುರುತಿನ ಚೀಟಿಯನ್ನು ತೋರಿಸಿ ಸಂಚರಿಸುವುದಕ್ಕೆ ಅನುಮತಿಸಿದೆ.
• ಭಾರತ ಸರ್ಕಾರದ, ಅದರ ಸ್ವಾಯತ್ತ/ಅಧೀನ ಸಂಸ್ಥೆಗಳ ಮತ್ತು ಸಾರ್ವಜನಿಕ ನಿಗಮಗಳ ಕಚೇರಿಗಳಾದ ದೂರಸಂಪರ್ಕ, ಅಂಚೆ ಕಚೇರಿ, ಬ್ಯಾಂಕುಗಳು, ಆರ್‍ಬಿಐ ನಿಯಂತ್ರಿಕ ಹಣಕಾಸು ಸಂಸ್ಥೆಗಳು, ರೈಲ್ವೇ ಮತ್ತು ತತ್ಸಂಬಂಧಿತ ಕಾರ್ಯಚಾರಣೆಗಳು ಕೆಲವು ಸಿಬ್ಬಂದಿಗಳೊಂದಿಗೆ ಮಾತ್ರ ಕಾರ್ಯನಿರ್ವಹಿಸತಕ್ಕದ್ದು.
• ಸರ್ಕಾರದ ಆದೇಶದ ಪ್ರಕಾರ ಸರ್ಕಾರೇತರ ಸಂಸ್ಥೆಗಳ ಕಛೇರಿಗಳು, ಇತರೆ ಎಲ್ಲಾ ಕಚೇರಿಗಳ ಸಿಬ್ಬಂದಿಗಳು ಮನೆಯಿಂದಲೇ ಕೆಲಸ ನಿರ್ವಹಿಸಬೇಕು. ತುರ್ತು ಸೇವೆಗಳಿಗೆ ಸಂಬಂಧಪಟ್ಟ ಇಲಾಖೆಗಳನ್ನು ಹೊರತುಪಡಿಸಿ ಉಳಿದ ಸರ್ಕಾರಿ, ಅರೆ ಸರ್ಕಾರಿ ಮತ್ತು ಖಾಸಗಿ ಕಚೇರಿಗಳ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮನೆಯಿಂದಲೇ ಕೆಲಸ ನಿರ್ವಹಿಸಬೇಕು.

ಜಿಲ್ಲೆಯಲ್ಲಿ ಮಾರ್ಚ್ 2020 ರಿಂದ ಮೇ 28 ರವರೆಗೆ ಮತ್ತು ಮತ್ತು 28 ಮೇ ರಂದು 522 ಹೊಸ ಪ್ರಕರಣಗಳು ಸೇರಿದಂತೆ ಒಟ್ಟು 40887 ಕೋವಿಡ್ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿರುತ್ತದೆ.
ಮೇ 27 ರವರೆಗೆ ಒಟ್ಟು 5,76,809 ಪರೀಕ್ಷೆಗಳನ್ನು ಮಾಡಲಾಗಿದ್ದು, 4,53,534 ಗಂಟಲು ದ್ರವದ ಮಾದರಿಗಳು ಆರ್‍ಟಿಪಿಸಿಆರ್ ಪರೀಕ್ಷೆಗಾಗಿ ಕಳುಹಿಸಿದ್ದು, 29173 ಪಾಸಿಟಿವ್ ಇರುತ್ತವೆ ಮತ್ತು ರ್ಯಾಪಿಡ್ ಅಂಟಿಜಿನ್ 1,22,588 ಪರೀಕ್ಷೆ ಮಾಡಲಾಗಿದ್ದು, 11,714 ಪಾಸಿಟಿವ್ ಇರುತ್ತವೆ.
ಜಿಲ್ಲೆಯಲ್ಲಿ ಈ ದಿನದವರೆಗೆ ಸಕ್ರಿಯ ಪ್ರಕರಣಗಳು 5,337 ಇರುತ್ತವೆ. ದಾವಣಗೆರೆ 2273, ಹರಿಹರ 665, ಜಗಳೂರು 376, ಚನ್ನಗಿರಿ 962, ಹೊನ್ನಾಳಿ 987, ಹೊರ ಜಿಲ್ಲೆ 74 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ 2021 ರ ಮೇ ಮಾಹೆಯಲ್ಲಿ 14,797 ಕೋವಿಡ್-19 ಪ್ರಕರಣಗಳು ದಾಖಲಾಗಿರುತ್ತವೆ.
ದಾವಣಗೆರೆ ಜಿಲ್ಲೆಯಲ್ಲಿ ಈ ದಿನದವರೆಗೆ ಒಟ್ಟು 21 ಮ್ಯುಕರ್‍ಮೈಕೋಸಿಸ್(ಬ್ಲಾಕ್ ಫಂಗಸ್) ಪ್ರಕರಣಗಳು ವರದಿಯಾಗಿವೆ. ಕೋವಿಡ್‍ನಿಂದ ಇದುವರೆಗೆ 342 ಜನ ಮೃತರಾಗಿದ್ದಾರೆ. ಎರಡನೇ ಅಲೆಯಲ್ಲಿ 78 ಜನರು ಮೃತ ಹೊಂದಿದ್ದು ಇದರಲ್ಲಿ ಪುರುಷರು 49 ಮಹಿಳೆಯರು 29 ಇದ್ದಾರೆ. ಹೋಂ ಐಸೋಲೇಷನ್ 2851, ಆಸ್ಪತ್ರೆಯಲ್ಲಿ 2486 ದಾಖಲಾಗಿದ್ದಾರೆ. 5337 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿ, ಎಪಿಡೆಮಿಕ್ ಡಿಸೀಸಸ್ ಆ್ಯಕ್ಟ್ ಅಡಿಯಲ್ಲಿ ಇದುವರೆಗೆ 131 ಪ್ರಕರಣಗಳನ್ನು ದಾಖಲಿಸಲಾಗಿದೆ. ಮಾಸ್ಕ್ ಮತ್ತು ಸಾರ್ವಜನಿಕ ಅಂತರ ಕಾಯ್ದುಕೊಳ್ಳದೇ ಇರುವ ಬಗ್ಗೆ 52,438 ಪ್ರಕರಣ ದಾಖಲಿಸಲಾಗಿದೆ. ವಿಪತ್ತು ನಿರ್ವಹಣಾ ಕಾಯ್ದೆಯಡಿ 1, ರೆಮಿಡೆಸಿವರ್ ಲಸಿಕೆ ಕುರಿತು 2 ಪ್ರಕರಣ ದಾಖಲಿಸಲಾಗಿದೆ. ಸಿಸಿಸಿ, ಆಕ್ಸಿಜನ್ ರೀಫಿಲ್ಲಿಂಗ್ ಸ್ಟೇಷನ್ ಇತರೆಡೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹೊಸ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಪೊಲೀಸ್ ನಿಯೋಜನೆ ಮಾಡಲಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಸಿಇಒ ಡಾ.ವಿಜಯ ಮಹಾಂತೇಶ್ ದಾನಮ್ಮನವರ್ ಮಾತನಾಡಿ, ಗ್ರಾಮೀಣ ಭಾಗಗಳಲ್ಲಿ ಕೋವಿಡ್ ಪ್ರಕರಣಗಳನ್ನು ಕಡಿಮೆ ಮಾಡಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸೋಂಕಿತರನ್ನು ಮನವೊಲಿಸಿ ಸಿಸಿಸಿ ಗೆ ಕರೆತರಲಾಗುತ್ತದೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನೆಮನೆಗೆ ಭೇಟಿ ನೀಡಿ ಸೋಂಕಿತರ ಕುರಿತು ಅಗತ್ಯ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಮೇ. 15 ರಿಂದ 25 ರವರೆಗೆ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದು ಕಳೆದ 2 ದಿನಗಳಿಂದ ಇಳಿಮುಖ ಕಾಣುತ್ತಿದೆ. ಪ್ರಸ್ತುತ 183 ಗ್ರಾಮಗಳಲ್ಲಿ ಸಕ್ರಿಯ ಪ್ರಕರಣಗಳು ಇರುವುದಿಲ್ಲ. 419 ಗ್ರಾಮಗಳಲ್ಲಿ 1 ರಿಂದ 5 ಪ್ರಕರಣಗಳು, 101 ಗ್ರಾಮಗಳಲ್ಲಿ 6 ಇಂದ 10 ಪ್ರಕರಣ ಮತ್ತು 74 ಗ್ರಾಮಗಳಲ್ಲಿ 10 ಕ್ಕಿಂತ ಹೆಚ್ಚು ಪ್ರಕರಣಗಳು ಇವೆ. 1343 ಜನರು ಕೋವಿಡ್ ಕೇರ್ ಸೆಂಟರ್‍ನಲ್ಲಿ ದಾಖಲಿಸಲಾಗಿದೆ. ಗ್ರಾಮಗಳಲ್ಲಿ ಸಾರ್ವಜನಿಕ ಪೂಜೆಗಳನ್ನು ನಿಷೇಧಿಸಲಾಗಿದೆ. ವಾರಕ್ಕೆರಡು ಬಾರಿ ಸ್ಯಾನಿಟೈಸ್ ಮಾಡಲಾಗುತ್ತಿದೆ.
ಪತ್ರಿಕಾಗೋಷ್ಟಿಯಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರವೀರಮಲ್ಲಪ್ಪ, ಡಿಹೆಚ್‍ಓ ಡಾ.ನಾಗರಾಜ್, ಆರ್‍ಸಿಹೆಚ್ ಅಧಿಕಾರಿ ಡಾ.ಮೀನಾಕ್ಷಿ ಇದ್ದರು.

ವರದಿ.ರೇಖಾ, ಆರ್, ಲಿಂಗಾಪುರ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend