ಬಳ್ಳಾರಿ ತಾಲ್ಲೂಕು ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಜಿಪಂ ಸಿಇಓ ಭೇಟಿ, ವೀಕ್ಷಣೆ
ನಿರ್ಭೀತರಾಗಿ ಮತ ಚಲಾಯಿಸುವಂತೆ ಮನವರಿಕೆ
ಬಳ್ಳಾರಿ:ಕೂಲಿಕಾರ್ಮಿಕರು ಮೇ 7 ರಂದು ತಪ್ಪದೇ ಮತದಾನ ಮಾಡಬೇಕು. ಹಣದ ಆಮಿಷಗಳಿಗೆ ಒಳಗಾಗದೇ ನಿಮ್ಮ ಅಮೂಲ್ಯವಾದ ಮತವನ್ನು ಮಾರಿಕೊಳ್ಳಬಾರದು ಎಂದು ಜಿಲ್ಲಾ ಸ್ವೀಪ್ ನೋಡೆಲ್ ಅಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಹೇಳಿದರು.
ಇಂದು ಬಳ್ಳಾರಿ ತಾಲ್ಲೂಕಿನ ಸಂಜೀವರಾಯನಕೋಟೆ ಗ್ರಾಪಂ ವ್ಯಾಪ್ತಿಯ ಮಿಂಚೇರಿ ಗ್ರಾಮದ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅನುಸ್ಟಾನ ಮಾಡಿರುವ ನಾಲಾ ಪುನಶ್ಚೇತನ ಕಾಮಗಾರಿ ಮತ್ತು ಹಲಕುಂದಿ ಗ್ರಾಪಂ ವ್ಯಾಪ್ತಿಯಲ್ಲಿ ಮನರೇಗಾ ಯೋಜನೆಯಡಿಯ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಮತದಾನ ಜಾಗೃತಿ ಮೂಡಿಸಿ ಅವರು ಮಾತನಾಡಿದರು.
ಮಿಂಚೇರಿ ಗ್ರಾಮದಲ್ಲಿ ಶೇ.100 ರಷ್ಟು ಮತದಾನ ಆಗಬೇಕು. ಮತದಾನ ದಿನದಂದು ಯಾರೂ ತಪ್ಪಿಸಬಾರದು. ನಿಮ್ಮ ಮತ- ನಿಮ್ಮ ಹಕ್ಕು ಎಂದು ಮನನ ಮಾಡಿದರು.
ಕೆಲಸಕ್ಕಾಗಿ ಬೇರೆ ಕಡೆ ವಲಸೆ ಹೋಗದೇ, ನಿಮ್ಮ ಗ್ರಾಮದಲ್ಲಿ ಕೆಲಸ ನೀಡಲಾಗುತ್ತಿದೆ. ಎಲ್ಲಾರು ನರೇಗಾ ಯೋಜನೆಯಡಿ ನೀಡುವ ಕಾಮಗಾರಿ ಕೆಲಸಕ್ಕೆ ಬರಬೇಕು ಎಂದರು.
ಕೂಲಿಕಾರರಿಗೆ ಕೂಲಿ ಮತ್ತು ಅಳತೆಯ ಬಗ್ಗೆ ಮಾಹಿತಿ ನೀಡಿದ ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಅವರು, ಬಿಸಿಲು ಹೆಚ್ಚಿರುವುದರಿಂದ ನೀರು ಮತ್ತು ನೆರಳಿನ ವ್ಯವಸ್ಥೆ ಮಾಡಬೇಕು ಎಂದು ಆಯಾ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಕೂಲಿಕಾರ್ಮಿಕರೊಂದಿಗೆ ಮತದಾನ ಜಾಗೃತಿ ಮತ್ತು ಪ್ರತಿಜ್ಞಾವಿಧಿ ಬೋಧಿಸಿದರು.
ಬಳಿಕ ಹಲಕುಂದಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಚೆಕ್ ಡ್ಯಾಮ್ನಲ್ಲಿ ಹೂಳು ತೆಗೆಯುವ ಕಾಮಗಾರಿ ವೀಕ್ಷಣೆ ನಡೆಸಿದರು. ನಂತರದಲ್ಲಿ ಬೂದು ನೀರು ನಿರ್ವಹಣೆ ಕಾಮಗಾರಿ ಪರಿಶೀಲನೆ ನಡೆಸಿದರು. ಹೊನ್ನಳ್ಳಿ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆಯಿಂದ ಅನುಸ್ಟಾನಗೊಳಿಸಿದ ಡ್ರ್ಯಾಗನ್ ಫ್ರೂಟ್ ಬೆಳೆ ವೀಕ್ಷಣೆ ಮಾಡಿದರು.
ಇದೇ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಕೂಲಿಕಾರರಿಗೆ ಮತದಾನದ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು.
ಈ ವೇಳೆ ಬಳ್ಳಾರಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ಆರ್.ಕೆ.ಬಸವರಾಜ್ ಸೇರಿದಂತೆ ಟಿಸಿ, ಟಿಎಂಐಎಸ್, ಟಿಐಇಸಿ, ಪಿಡಿಓ, ಟಿಎಇ ಸೇರಿದಂತೆ ಗ್ರಾಮ ಪಂಚಾಯತಿ ಸಿಬ್ಬಂದಿ ಹಾಜರಿದ್ದರು….
ವರದಿ. ವಿರೇಶ್, ಎಚ್, ಬಳ್ಳಾರಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030