ರೈತರ ಆದಾಯ ದ್ವಿಗುಣಗೊಳಿಸಲು ಕೃಷಿಪೂರಕ ಚಟುವಟಿಕೆಗಳಿಗೆ ಸರ್ಕಾರದ ಪ್ರೋತ್ಸಾಹ
-ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು ಗ್ರಾಮಾಂತರ :
ರೈತರ ಆದಾಯ ದ್ವಿಗುಣಗೊಳಿಸಲು ಹೈನುಗಾರಿಕೆ,ರೇಷ್ಮೆ,ತೋಟಗಾರಿಕೆಯಂತಹ ಕೃಷಿಪೂರಕ ಚಟುವಟಿಕೆಗಳಿಗೆ ಸರ್ಕಾರ ಉತ್ತೇಜನ ನೀಡುತ್ತಿದೆ ಎಂದು ಆರೋಗ್ಯ,ಕುಟುಂಬ ಕಲ್ಯಾಣ,ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ನೆಲಮಂಗಲ ತಾಲೂಕು ನಿಡವಂದ ಗ್ರಾಮದಲ್ಲಿ 39 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿರುವ ಪಶುಚಿಕಿತ್ಸಾಲಯದ ನೂತನ ಕಟ್ಟಡ ಉದ್ಘಾಟಿಸಿ ಅವರು , ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಸರ್ಕಾರವು ಪಶುಸಂಗೋಪನೆ ಹಾಗೂ ಹೈನುಗಾರಿಕೆಗೆ ಪ್ರೋತ್ಸಾಹಿಸುತ್ತಿದೆ.450 ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ಕ್ರಮವಹಿಸಲಾಗಿದೆ.ಸಂಚಾರಿ ಪಶುಚಿಕತ್ಸಾಲಯಗಳ ಸೇವೆ ಒದಗಿಸಲಾಗುತ್ತಿದೆ.ಜಾನುವಾರುಗಳ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಲಾಗಿದೆ.ರೈತರು ತಮ್ಮ ಆದಾಯ ದ್ವಿಗುಣಗೊಳಿಸಿಕೊಳ್ಳಲು ಹೈನುಗಾರಿಕೆ,ಕುರಿ,ಕೋಳಿ ಸಾಕಾಣಿಕೆ,ರೇಷ್ಮೆ,ತೋಟಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳಬೇಕು.ರೈತರ ಬೇಡಿಕೆಗೆ ಅನುಗುಣವಾಗಿ ಕಳೆದ ವಾರವಷ್ಟೇ ಹಾಲಿನ ದರ ಪರಿಷ್ಕರಣೆ ಮಾಡಲಾಗಿದೆ ಎಂದರು.
ಪಶುಸಂಗೋಪನಾ ಸಚಿವರಾದ ಪ್ರಭು ಚವ್ಹಾಣ ಮಾತನಾಡಿ, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.ಕೆಲವು ಪ್ರಕರಣಗಳು ನ್ಯಾಯಾಲಯದಲ್ಲಿರುವುದರಿಂದ ಅವು ಇತ್ಯರ್ಥವಾದ ಕೂಡಲೇ ಮುಂದಿನ ಕ್ರಮ ವಹಿಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ “ಪಶುಸಂಜೀವಿನಿ” ಸಂಚಾರಿ ಪಶುಚಿಕಿತ್ಸಾಲಯಕ್ಕೆ ಸಚಿವರು ಚಾಲನೆ ನೀಡಿದರು.
ನೆಲಮಂಗಲ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ,ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ನಿರ್ದೇಶಕ ಡಾ.ಮಂಜುನಾಥ ಎಸ್.ಪಾಳೇಗಾರ,ಜಿಲ್ಲಾಧಿಕಾರಿ ಆರ್.ಲತಾ,ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೆ.ರೇವಣಪ್ಪ,ತಹಸೀಲ್ದಾರ ಮಂಜುನಾಥ ಮತ್ತಿತರರು ಇದ್ದರು..
ವರದಿ. ಕಲಾವತಿ. ಎನ್. ಎಂ.ಬಿ.ಅಯ್ಯನಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030