ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯಕ್ಕಾಗಿ ಇಂದು ಪಾದಯಾತ್ರೆ
ಸಿಂಧನೂರು:ಅ.7. ರಾಜ್ಯದ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ಏಪ್ರಿಲ್ 1, 2006ರ ನಂತರ ಅಥವಾ ಮೊದಲು ನೇಮಕಗೊಂಡು ವೇತನ ಪಡೆಯುತ್ತಿರು ವ ಅನುದಾನಗೊಳಪಟ್ಟು ವೇತನ ಪಡೆಯುತ್ತಿರುವ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯ ನೀಡಲು ಆಗ್ರಹಿಸಿ ಅ.7 ರಂದು ತುಮಕೂರು ಸಿದ್ಧ ಗಂಗಾ ಮಠದಿಂದ ಬೆಂಗಳೂರಿನ ಫ್ರೀಡಂಪಾರ್ಕ್ ವರೆಗೆ ಪಾದಯಾತ್ರೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಅನುದಾನಿತ ಶಾಲಾ – ಕಾಲೇಜು ಗಳ ಪಿಂಚಣಿ ವಂಚಿತರ ನೌಕರರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಪಂಪಾಪತೆಪ್ಪ ಗುಡುದೂರು ತಿಳಿಸಿದರು.
ನಗರದ ನೌಕರರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ಅನುದಾನಿತ ಶಾಲಾ ಕಾಲೇಜುಗಳಲ್ಲಿ ದುಡಿದ ಮೂರು ಸಾವಿರಕ್ಕೂ ಹೆಚ್ಚು ನೌಕರರು ಕೊನೆಯ ತಿಂಗಳ ಸಂಬಳ ಮಾತ್ರ ಪಡೆದು ಬರಿಗೈಯಲ್ಲಿ ನಿವೃತ್ತಿಯಾಗಿದ್ದಾರೆ. ಅನೇಕ ರು ಸೇವೆಯಲ್ಲಿರುವಾಗಲೇ ಅಕಾಲಿಕ ಮರಣ ಹೊಂದಿದ್ದಾರೆ. ಅಂತಹವರ ಕುಟುಂಬಗಳಿಗೆ ಯಾವುದೇ ಆರ್ಥಿಕ ಸೌಲಭ್ಯ ದೊರೆತಿಲ್ಲ. ನೌಕರರು ವೇತನಾನುದಾನಕ್ಕೆ ಒಳಪಡಲು ಪೂರ್ವದ ಸೇವೆ ಯನ್ನು ಸೇವೆಗೆ ಸೇರಿದ ದಿನದಿಂದಲೇ ಪರಿಗಣಿಸಿ ವಿವಿಧ ಸೌಲಭ್ಯಗಳನ್ನುನೀಡಬೇಕೆಂದು ಸರ್ವೋಚ್ಛ ನ್ಯಾಯಾಲಯವೇ ತೀರ್ಪು ನೀಡಿದ್ದರೂ ಸಹ ಸರ್ಕಾರ ಬೇಡಿಕೆ ಈಡೇರಿಸುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬೇರೆ ರಾಜ್ಯಗಳಲ್ಲಿ ಅಲ್ಲಿನ ಸರ್ಕಾರಗಳು ಅನುದಾನಿತ ಸಂಸ್ಥೆಗಳ ನೌಕರರಿಗೆ ಪಿಂಚಣಿ ನೀಡಲಾಗುತ್ತಿದೆ, ಆದರೆ ದೇಶದಲ್ಲಿ ಎಲ್ಲಿಯೂ ಇಲ್ಲದೆ ಕೇವಲ ಕರ್ನಾಟಕದಲ್ಲಿ ಮಾತ್ರ ಈ ತಾರತಮ್ಯ ಇರುವುದು ದುರಂತ. ಅಲ್ಲದೆ ಕರ್ನಾಟಕ ಸರ್ಕಾರದ 6ನೇ ವೇತನ ಆಯೋಗವು ಅನುದಾನಿತ ನೌಕರರಿಗೆ ಪಿಂಚಣಿ ಸೌಲಭ್ಯ ನೀಡುವಂತೆ ಸರ್ಕಾರ ಕ್ಕೆ ಶಿಫಾರಸ್ಸು ಮಾಡಿದೆ. ಇತ್ತೀಚಿಗೆ ಸ್ವಾಯತ್ತ ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರಿಗೆ ಪಿಂಚಣಿ ಜಾರಿಗೊಳಿಸಲಾಗಿದೆ. ಎನ್.ಪಿ.ಎಸ್. ಜಾರಿಗೂ ಮುನ್ನ ನೇಮಕಾತಿ ಪ್ರಕ್ರಿಯೆ ಪೂರ್ಣ ಗೊಂಡು ತದನಂತರ ನೇಮಕ ವಾದ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರಿಗೆ ನಿಶ್ಚಿತ ಪಿಂಚಣಿ ನೀಡಲಾಗಿದೆ. ಆದರೆ 2006ಕ್ಕೂ ಮೊದಲು ನೇಮಕವಾಗಿ ನಂತರ ಅನುದಾನಗೊಳ ಪಟ್ಟ ಅನುದಾನಿತ ನೌಕರರಿಗೆ ತಾರತಮ್ಯ ಮಾಡಲಾಗಿದೆ ಎಂದು ಅವರು ದೂರಿದರು.
ಸರ್ಕಾರದ ಈ ಅನ್ಯಾಯವನ್ನು ಖಂಡಿಸಿ ರಾಜ್ಯಾದ್ಯಂತ ಅನೇಕ ಹೋರಾಟಗಳನ್ನು ಮಾಡಲಾಗಿದ್ದು, ಹಾಗೂ ಸೆಪ್ಟಂಬರ್ 20 ರಂದು ಪ್ರೀಡಂಪಾರ್ಕ್ ನಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದ್ದರು ಕೂಡ ಬೇಡಿಕೆಗಳನ್ನು ಈಡೇರಿಸಿಲ್ಲ.ಆದ್ದರಿಂದ ಸಂಘದ ತೀರ್ಮಾನ ದಂತೆ ರಾಜ್ಯದ ಎಲ್ಲ ಜಿಲ್ಲೆಗಳ ಪಿಂಚಣಿ ವಂಚಿತ ನೌಕರರು ಬೃಹತ್ ಪಾದಯಾತ್ರೆ ಹಮ್ಮಿಕೊಂಡು ನಂತರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ. ಅಷ್ಟಕ್ಕೂ ಸರ್ಕಾರ ಹೋರಾಟಕ್ಕೆ ಮನ್ನಣೆ ನೀಡದಿದ್ದರೆ ಆ.16 ರಿಂದ ರಾಜ್ಯದಾದ್ಯಂತ ಶಾಲಾ-ಕಾಲೇಜ ಬಂದ್ ಮಾಡಿ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಪಿಂಚಣಿ ವಂಚಿತ ನೌಕರರ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹನುಮಂತಪ್ಪ ವಾಲ್ಮೀಕಿ, ಪ್ರಾಥಮಿಕ ಶಾಲಾ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಹುಸೇನಪ್ಪ ಗೊರಬಾಳ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಂ.ವಿಠಲ್, ತಾಲೂಕು ಪ್ರಧಾನ ಕಾರ್ಯದರ್ಶಿ ಆಂಜನೇಯ, ಜಿಲ್ಲಾ ಸಮಿತಿ ಸದಸ್ಯ ನಾಗರಾಜ ಗೋರೆಬಾಳ ಇನ್ನಿತರರಿದ್ದರು…
ವರದಿ.ದುಗ್ಗಪ್ಪ ಸಿಂಧನೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030