ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಆಗ್ರಹ ಹಾಗೂ ಶಿಶುಪಾಲನಾ ಕೇಂದ್ರಗಳನ್ನು ಆರಂಭ ಮಾಡುವುದನ್ನು ವಿರೋಧಿಸಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ಹೊಳಲ್ಕೆರೆ ವತಿಯಿಂದ ಶುಕ್ರವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ತಹಶೀಲ್ದಾರ್ರವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ವೇಳೆ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ಅಧ್ಯಕ್ಷೆ ನಿರ್ಮಲಾ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಕಳೆದ ೪೮ ವರ್ಷಗಳಿಂದ ೬ ವರ್ಷದ ಒಳಗಿನ ಮಕ್ಕಳನ್ನು ಅಂಗನವಾಡಿ ಕೇಂದ್ರಗಳಲ್ಲಿ ಆರೋಗ್ಯ ಮತ್ತು ಶಿಕ್ಷಣವನ್ನು ನೀಡಲಾಗುತ್ತಿದೆ. ಆದರೆ ಇದೀಗ ರಾಜ್ಯ ಸರಕಾರ ಅಂಗನವಾಡಿ ಕೇಂದ್ರಗಳಲ್ಲಿ ಶಾಲಾ ಪೂರ್ವ ತರಗತಿಗಳನ್ನು ಆರಂಭಿಸಲು ಮುಂದಾಗಿರುವುದು ಅಂಗನವಾಡಿ ಕೇಂದ್ರಗಳಿಗೆ ಗಂಭೀರವಾದ ಪರಿಣಾಮ ಬೀರಲಿದೆ. ಈಗಾಗಲೇ ಸರಕಾರಿ ಶಾಲೆಗಳಲ್ಲಿ ೪ರಿಂದ ೫ ವರ್ಷದ ಮಕ್ಕಳಿಗೆ ಎಲ್ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ಸೂಚಿಸಿರುವುದು ಆಘಾತ ತಂದಿದೆ ಎಂದು ಹೇಳಿದರು.
೨೦೨೩ರ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟಿಯ ನಾಯಕಿ ಪ್ರಿಯಾಂಕ ಗಾಂಧಿಯವರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ವೇತನವನ್ನು ಕ್ರಮವಾಗಿ ೧೦ ಸಾವಿರ ಹಾಗೂ ೧೫ ಸಾವಿರಕ್ಕೆ ಹೆಚ್ಚಳ ಮಾಡುವುದಾಗಿ ಭರವಸೆ ನೀಡಿದ್ದರು. ಅದರಂತೆ ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ ವೇತನ ಹೆಚ್ಚಳ ಮಾಡುವ ಮೂಲಕ ೬ನೇ ಗ್ಯಾರಂಟಿಯನ್ನು ಜಾರಿಗೊಳಿಸಬೇಕು. ಅಲ್ಲದೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಗ್ರಾಚ್ಯುಟಿ ಪಡೆಯಲು ಅರ್ಹರು ಎಂಬ ಸುಪ್ರೀಂಕೋರ್ಟ್ ತೀರ್ಪನ್ನು ಎಲ್ಲಾ ನಿವೃತ್ತರಿಗೂ ಅನ್ವಯವಾಗುವಂತೆ ಜಾರಿಗೊಳಿಸಬೇಕು. ಈ ಮೂಲಕ ಅಂಗನವಾಡಿ ಕೇಂದ್ರಗಳನ್ನು ಉಳಿಸಿ-ಅಂಗನವಾಡಿ ವ್ಯವಸ್ಥೆಗಳನ್ನು ಬಲಗೊಳಿಸಬೇಕು ಎಂದು ಆಗ್ರಹಿಸಿದರು.
ಮನವಿ ಸ್ವೀಕರಿಸಿ ತಹಶೀಲ್ದಾರ್ ಬೀಬಿ ಪಾತಿಮಾ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ನೀಡಿದ ಮನವಿ ಪತ್ರವನ್ನು ಈ ದಿನವೇ ಜಿಲ್ಲಾಧಿಕಾರಿಗಳ ಮೂಲಕ ಸರಕಾರದ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು…
ವರದಿ. ಸುರೇಶ್ ಹೊಳಲ್ಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030